ಸತೀಶ್ ಜಾರಕಿಹೊಳಿ ಮುಖ್ಯ ಮಂತ್ರಿ ಆಗಲಿ- ಚನ್ನರಾಜ್ ಹಟ್ಟಿಹೊಳಿ

ಉಮೇಶ ಗೌರಿ (ಯರಡಾಲ)

ಸುದ್ದಿ ಸದ್ದು ನ್ಯೂಸ್ 

ಯಮಕನಮರಡಿ-ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ರಾಜ್ಯದ ಮುಖ್ಯಮಂತ್ರಿ ಆಗಬೇಕು ಎನ್ನುವುದು ನಮ್ಮೆಲ್ಲರ ಆಶಯವಾಗಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಚನ್ನರಾಜ್ ಹಟ್ಟಿಹೊಳಿ ಹೇಳಿದರು.

ಯಮಕನಮರಡಿ ಮತಕ್ಷೇತ್ರದ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿ, ವಿಧಾನಪರಿಷತ್ ಚುನಾವಣೆಯೂ ಸಹ ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ದಿಕ್ಸೂಚಿ ಆಗಬೇಕು. ಈ ನಿಟ್ಟಿನಲ್ಲಿ ಗ್ರಾಮ ಪಂಚಾಯ್ತಿ ಚುನಾಯಿತ ಪ್ರತಿನಿಧಿಗಳು ಸೇರಿ ಒಟ್ಟಿಗೆ ಕೆಲಸ ಮಾಡೋಣ ಎಂದರು.

ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾದ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಸ್ಪರ್ಧೆ ಮಾಡಿದಾಗಿನಿಂದ ಜಿಲ್ಲೆಯಾದ್ಯಂತ ಕೈ ಕಾರ್ಯಕರ್ತರಲ್ಲಿ ಹುಮ್ಮಸ್ಸು ಹೆಚ್ಚಾಗಿದ್ದು 2023ರ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯಲ್ಲಿ 18 ಕ್ಷೇತ್ರದಲ್ಲಿ 12 ರಿಂದ 14 ಕ್ಷೇತ್ರಗಳಲ್ಲಿ ಕೈ ಅಭ್ಯರ್ಥಿಗಳನ್ನು ಗೆಲ್ಲಿಸಿ ವಿಧಾನಸಭೆಯ ಮೂರನೇಯ ಮಹಡಿಗೆ ಕಳಿಸಲು ಶ್ರಮ ವಹಿಸೋಣ ಎಂದು ಕಾರ್ಯಕರ್ತರಲ್ಲಿ ಮನವಿ ಮಾಡಿದರು.

ಸತೀಶ್ ಜಾರಕಿಹೊಳಿ ಅವರು ಕೇವಲ ಜಿಲ್ಲೆಯ ನಾಯಕರಲ್ಲ, ಮಾನವ ಬಂಧುತ್ವ ವೇದಿಕೆಯನ್ನು ಹುಟ್ಟು ಹಾಕಿ, ಬುದ್ದ, ಬಸವ, ಅಂಬೇಡ್ಕರ್ ಅವರ ತತ್ವ ಆದರ್ಶಗಳನ್ನು ಜನರಿಗೆ ತಿಳಿಸುತ್ತಾ ಅವರ ಹಾದಿಯಲ್ಲೇ ನಡೆದು ರಾಜ್ಯದ ಜನರು ಮನಸ್ಸಿನಲ್ಲಿ ಹೆಚ್ಚು ಹಸಿರಾಗಿ ಉಳಿದಿದ್ದಾರೆ ಎಂದು ಹೇಳಿದರು.

ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಮಾತನಾಡಿ ಚನ್ನರಾಜ್ ಹಟ್ಟಿಹೊಳಿ ಅವರನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನಾಗಿಸಲು ನಮ್ಮ ಪಕ್ಷದ ವರಿಷ್ಠರು ಹಾಗೂ ಜಿಲ್ಲೆಯ ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದೇವೆ. ಆದರೆ, ಇನ್ನು ಅಧಿಕೃತವಾಗಿ ಘೋಷಣೆ ಆಗಿಲ್ಲ ಇನ್ನೂ ಎರಡ್ಮೂರು ದಿನಗಳಲ್ಲಿ ಘೋಷಣೆ ಮಾಡಲಾಗುವುದು ನಂತರ ನ.22 ರಂದು ಚನ್ನರಾಜ್ ಹಟ್ಟಿಹೊಳಿ ಅವರು ನಾಮಪತ್ರ ಸಲ್ಲಿಸಲಿದ್ದಾರೆ ಎಂದರು

ಈ ವೇಳೆ ರಾಮಣ್ಣಾ ಗೂಳಿ , ಫಕ್ಕೀರಪ್ಪಾ ಹಂಚಿನಮನಿ, ಅರುಣ ಕುಟಾಂಬಳೆ, ಸಿದಗೌಡ ಸುನಗಾರ, ವೀರಣ್ಣಾ ಬಿಸಿರೊಟ್ಟಿ, ಮಂಜುನಾಥ ಪಾಟೀಲ, ಮಹಾಂತೇಶ್ ಮಗದುಮ್ಮ, ಯಲ್ಲಪ್ಪಾ ಬುದ್ರಿ, ರಾಹುಲ್ ಶಿಂಗೆ, ರವೀಂದ್ರ ಜಿಂಡ್ರಾಳಿ ಸೇರಿದಂತೆ ಇನ್ನೂ ಅನೇಕರು ಇದ್ದರು.

Share This Article
";